ಯಲಹಂಕದಲ್ಲಿ ನಡೆದ ಕುಂದುಕೊರತೆಗಳ ಸ್ವೀಕಾರ, ದೂರುಗಳ ವಿಚಾರಣಾ ಸಭೆ :

ಯಲಹಂಕ : ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳು ತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ಮುಕ್ತವಾದ ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆಯನ್ನು ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್. ಫಣೀಂದ್ರ ರವರು ಕರೆ ನೀಡಿದರು.

ಕರ್ನಾಟಕ ಲೋಕಾಯುಕ್ತ ಕಚೇರಿ ವತಿಯಿಂದ ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೆಂ.ನಗರ ಜಿಲ್ಲಾ ವ್ಯಾಪ್ತಿಯ ಯಲಹಂಕ ಮತ್ತು  ಬೆಂ.ಪೂರ್ವ ತಾಲ್ಲೂಕುಗಳಿಗೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳ ಸ್ವೀಕಾರ, ದೂರುಗಳ ವಿಚಾರಣೆ ಮತ್ತು ಪ್ರಕರಣಗಳ  ವಿಲೇವಾರಿ  ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ನೀಡುವ ಸವಲತ್ತುಗಳನ್ನು ಪಡೆಯುವ ಹಕ್ಕು ಎಲ್ಲಾ ನಾಗರೀಕರಿಗೆ ಇದೆ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ಸರ್ಕಾರದ ಸೌಕರ್ಯಗಳು ಸಿಗದೇ ಇದ್ದಲ್ಲಿ, ಆ ಸೌಲಭ್ಯಗಳನ್ನು ಕೊಡಿಸುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದರು.

ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಲೋಕಾಯುಕ್ತ ಸಂಸ್ಥೆಯ ಕಾರ್ಯೋದ್ದೇಶ. ಸರ್ಕಾರದ ಸವಲತ್ತುಗಳು ಜನರಿಗೆ ತಲುಪುತ್ತಿದೆಯೇ? ಎಲ್ಲಿ ಕೆಲಸ ಆಗುತ್ತಿಲ್ಲ? ಯಾವ ಕೆಲಸ ವಿಳಂಬವಾಗುತ್ತಿದೆ? ಎಂಬುದನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವನ್ನು ನಾವು ಮಾಡುತ್ತೇವೆ. ಒಂದು ವೇಳೆ ಸೌಕರ್ಯ ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಕರ್ತವ್ಯಲೋಪ ಎಸಗಿದರೆ, ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ದೂರು ಸಲ್ಲಿಸಿದ ಕೂಡಲೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ, ಸೂಕ್ತ ವಿಚಾರಣೆ ನಡೆಸಿ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳಿಗೆ ಸಾಕಷ್ಟು ಅವಕಾಶವನ್ನು ನೀಡಲಾಗುವುದು. ಆರೋಪ ಸಾಬೀತಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾವುದು, ಒಂದು ವೇಳೆ ದೂರುದಾರರು ಸುಳ್ಳು ಆರೋಪದ ದೂರು ನೀಡಿದಲ್ಲಿ ಅಂತಹ ಪ್ರಕರಣಗಳಲ್ಲಿ ದೂರುದಾರರ ವಿರುದ್ಧವೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಹಲವಾರು ಕ್ಷೇತ್ರಗಳಲ್ಲಿ ಸಾರ್ವಜನಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅಗತ್ಯ ಅರಿವು ಇಲ್ಲದಿರುವ ಕಾರಣ ಇಂತಹ ಕುಂದು ಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಇದರ ಸಂಪೂರ್ಣ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಗೌರವಾನ್ವಿತ  ಕರ್ನಾಟಕ ಅವರು ಮಾತನಾಡಿ ರಾಷ್ಟ್ರದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸಮಾಜದ ತಪ್ಪುಗಳನ್ನು ತಿದ್ದಲು ಸಾಧ್ಯ. ತನ್ಮೂಲಕ ಪ್ರಾಮಾಣಿಕ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಈ ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತರಾದ ಬಿ.ವೀರಪ್ಪ, ಬಿಬಿಎಂಪಿ ಮುಖ್ಯ ಆಯುಕ್ತರದ ತುಷಾರ್ ಗಿರಿನಾಥ್, ಬೆಂ.ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಲತಾ ಕುಮಾರಿ, ಬೆಂ.ನಗರ ಈಶಾನ್ಯ ವಿಭಾಗದ ಉಪ ಪೋಲಿಸ್ ಆಯುಕ್ತ ಸಜೀತ್ ವಿ.ಜೆ., ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಕರೀಗೌಡ , ಕರ್ನಾಟಕ ಲೋಕಯುಕ್ತದ ಕಾನೂನು ಅಭಿಪ್ರಾಯ -2 ಸಹಾಯಕ ನಿಬಂಧಕ ಶುಭವೀರ ಬಿ., ಯಲಹಂಕ ತಹಶಿಲ್ದಾರ್ ಶ್ರೇಯಸ್ ಜಿ.ಎಸ್., ಉಪ ತಹಶಿಲ್ದಾರ್ ರಮೇಶ್ ಬಾಬು ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ದೂರುದಾರರು,  ಸಾರ್ವಜನಿಕರು ಉಪಸ್ಥಿತರಿದ್ದರು.

ಮೊದಲ ದಿನ 70ಕ್ಕೂ ಹೆಚ್ಚಿನ ಅರ್ಜಿಗಳ ವಿಚಾರಣೆ :

ಗುರುವಾರ ಸ್ವೀಕರಿಸಿರುವ ಕುಂದುಕೊರತೆಗಳಲ್ಲಿ 1993ರಿಂದ 2004ರವರೆಗೆ ಬಗರ್ ಹುಕುಂ ಸಕ್ರಮ ಸಮಿತಿ ಮಂಜೂರು ಮಾಡಿರುವ ಜಮೀನುಗಳನ್ನು ಪೋಡಿ ಮಾಡಿ ಕೊಡುವುದು, ಕಂದಾಯ ಇಲಾಖೆಯಲ್ಲಿ ರೈತರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡುವುದು, ‘ಇ’ ಖಾತೆಗಳನ್ನು ಮಾಡಿಕೊಡುವುದು, ಯಲಹಂಕ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಮೇಲ್ಸೇತುವೆ, ಬೃಹತ್ ರಸ್ತೆ ಕಾಮಗಾರಿಗಳಿಗೆ ವೇಗ ನೀಡುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತ 70 ಕ್ಕೂ ಹೆಚ್ಚಿನ ಅರ್ಜಿಗಳನ್ನು ಮಾನ್ಯ ಉಪಲೋಕಾಯುಕ್ತರು ಸ್ವೀಕರಿಸಿ, ಅವುಗಳಿಗೆ ಸೂಕ್ತ ಪರಿಹಾರೋಪಾಯ ನೀಡಿದರು.

Leave a Reply

Your email address will not be published. Required fields are marked *