ಪಬ್ಲಿಕ್ ಪವರ್:
ಬಂಗಾರಪೇಟೆ :ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವುದು, ಪ್ರತಿನಿತ್ಯ ಶೌಚಾಲಯಗಳನ್ನು ಬಳಸುವಂತೆ ಜನ ಸಾಮಾನ್ಯರಿಗೆ ಪ್ರೇರೇಪಿಸುವ ಉದ್ದೇಶದಿಂದ ಪ್ರತಿವರ್ಷ ನ.19ರಂದು ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತಿದೆ.ಅದರ ಅಂಗವಾಗಿ ನ.19 ರಿಂದ ಡಿ.10ರ ತನಕ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಕಾರ್ಯಕ್ರಮ ನಡೆಯುತ್ತದೆ ಎಂದು ಪಿಡಿಓ ಶಂಕರ್ ಹೇಳಿದರು.

ತಾಲೂಕಿನ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಕೆಸರನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛ ಭಾರತ್ ಮಿಷನ್‌ ಯೋಜನೆಯಡಿಯಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ,
ಗ್ರಾಮದ ಪ್ರತಿ ನಾಗರಿಕರು ಸಹ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು.ದೈನಂದಿನ ಜೀವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದುರು.

ಜನರಲ್ಲಿ ಸುರಕ್ಷಿತ ನೈರ್ಮಲ್ಯ,ಶುಚಿತ್ವದ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಶೌಚಾಲಯ ಬಳಸುವಂತೆ ಪ್ರೇರೇಪಿಸಲು ನಮ್ಮ ಶೌಚಾಗೃಹ ನಮ್ಮ ಗೌರವ ಆಂದೋಲನ ಸಹಕಾರಿಯಾಗಲಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಗೃಹ ರಹಿತ ಕುಟುಂಬಗಳಿದ್ದರೆ ಅವರನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಶೌಚಾಗೃಹವನ್ನು ಪಂಚಾಯಿತಿ ಕಡೆಯಿಂದ ನಿರ್ಮಿಸಿ ಕೊಡುತ್ತೇವೆ ಎಂದು ತಿಳಿಸಿದರು.

ಮಕ್ಕಳಲ್ಲಿಯೂ ಸಹ ಶೌಚಾಲಯಗಳ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಶಾಲೆಗಳಲ್ಲೂ ಸಹ ಈ ಆಂದೋಲವನ್ನು ಹಮ್ಮಿಕೊಂಡಿದ್ದೇವೆ.ಶಾಲೆಗಳಲ್ಲಿ ಶೌಚಾಲಯಗಳು ಹಾಳಾಗಿದ್ದಲ್ಲಿ ದುರಸ್ತಿ ಕಾರ್ಯವನ್ನು ಸಹ ಪಂಚಾಯಿತಿಯಿಂದ ಮಾಡಿಕೊಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸತ್ಯಮ್ಮ, ಶಾಲೆಯ ಮುಖ್ಯ ಶಿಕ್ಷಕರಾದ ನಾರಾಯಣಸ್ವಾಮಿ, ಮುಖಂಡರಾದ ಗೋವಿಂದ, ಬೆಂಗನೂರು ರಾಜು, ಸಿಬ್ಬಂದಿಯಾದ ರವಿಕುಮಾರ್, ರಾಜಕುಮಾರ್, ವನಿತಾ ಹಾಗೂ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *