ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ :




ಡಿ. 28 ರಿಂದ ಎರಡು ದಿನಗಳ
ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ :
ಯಲಹಂಕ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವರ ಸಹಯೋಗದೊಂದಿಗೆ ಡಿ. 28 ಮತ್ತು 29ರಂದು ಎರಡು ದಿನಗಳ ‘ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ’ವನ್ನು ಕಲಾವಿದೆ, ಖ್ಯಾತ ಚಲನ ಚಿತ್ರನಟಿ, ಸಾಮಾಜಿಕ ಹೋರಾಟಗಾರ್ತಿ ಉಮಾಶ್ರೀ ಯವರ ಸರ್ವಾಧ್ಯಕ್ಷತೆಯಲ್ಲಿ ಬಾಗಲೂರಿನ ವಿಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್ ತಿಳಿಸಿದರು.
ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆರಂಭವಾಗಿ ಯಶಸ್ವಿಯಾಗಿ ನಾಲ್ಕು ವರ್ಷಗಳು ಕಳೆದಿದ್ದು, ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನವನ್ನು ಇಸ್ರೋದ ಮಾಜಿ ಅಧ್ಯಕ್ಷರು ಹಾಗೂ ಖ್ಯಾತ ವಿಜ್ಞಾನಿ ಡಾ.ಎ.ಎಸ್.ಕಿರಣ್ ಕುಮಾರ್ ಅವರು ಸರ್ವಾಧ್ಯಕ್ಷತೆಯಲ್ಲಿ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. ಎರಡನೇ ಸಮ್ಮೇಳನವನ್ನು ಜಸ್ಟೀಸ್ ನಾಗಮೋಹನ್ ದಾಸ್ ಅವರ ಸರ್ವಾಧ್ಯಕ್ಷತೆಯಲ್ಲಿ ತುಮಕೂರಿನಲ್ಲಿ ನಡೆಸಲಾಗಿತ್ತು, ಕಳೆದ ವರ್ಷ ನಡೆದ ಮೂರನೇ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರನಲ್ಲಿ, ಸತೀಸ್ ಜಾರಕೀಹೊಳಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಸಲಾಗಿತ್ತು.
ಈ ಬಾರಿಯ 4ನೇ ಸಮ್ಮೇಳನವನ್ನು ಬಾಗಲೂರಿನಲ್ಲಿ ಆಯೋಜಿಸಿದ್ದು, ಅನೇಕ ಚಿಂತನ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ ಪ್ರದರ್ಶನ, ಹಾಸ್ಯಸಂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಆಹಾರ ಮೇಳ, ಕರಕುಶಲ ಮೇಳ, ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದಲ್ಲಿ ಜೀವಮಾನದ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೆ ಒಬ್ಬರಂತೆ 37 ಜನರಿಗೆ ರಾಜ್ಯ ಮಟ್ಟದಲ್ಲಿ ಹೆಚ್.ಎನ್. ಪ್ರಶಸ್ತಿಯನ್ನು ನೀಡಲಾಗುವುದು. ಮಹಿಳಾ ಸಾಧಕಿ ಯರನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಚೈತನ್ಯಸ್ತ್ರೀ ಪ್ರಶಸ್ತಿಯನ್ನು ನೀಡಿ ಅಭಿನಂದಿಸುವುದು ಈ ಬಾರಿಯ ಸಮ್ಮೇಳನದ ವಿಶೇಷತೆಯಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಸಮ್ಮೇಳನ ಉದ್ಘಾಟಿಸಲು ಆಹ್ವಾನಿಸಲಾಗಿದೆ. ಉಪಮುಖ್ಯ ಮಂತ್ರಿಗಳು, ಕೇಂದ್ರ ಹಾಗೂ ರಾಜ್ಯದ ಅನೇಕ ಮಂತ್ರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ತು ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ವಿಜ್ಞಾನಿಗಳು, ಸಾಮಾಜಿಕ ಚಿಂತಕರು, ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಸಮ್ಮೇಳನ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ಡಾ.ಶ್ರೀರಾಮಚಂದ್ರ, ಆರ್.ರವಿ ಬಿಳಿಶಿವಾಲೆ, ಡಾ.ಚಿಕ್ಕಹನುಮಂತೇಗೌಡ, ಪ್ರೊ.ನಾರಾಯಣಗೌಡ, ವಿ.ಟಿ.ಸ್ವಾಮಿ, ಮುನಿವೆಂಕಟಪ್ಪ, ಡಾ.ವಿ.ಸುರೇಶ್, ಸುಮಾರಮೇಶ್, ಕೊಯಿರಾ ಮೂರ್ತಿ, ಪೋಲೀಸ್ ಅಧಿಕಾರಿ ಪೂಜಾರ್ ಬಾಳಯ್ಯ, ಬಿ.ಜಿ.ಲಿಂಗರಾಜ,ಡಾ.ಬೀರೇಗೌಡ, ಬೈರಪ್ಪ ಬಿ.ಡಿ.ರವಿಕುಮಾರ್, ಮೊದಲಾದವರು ಉಪಸ್ಥಿತರಿದ್ದರು