ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೆಂಪೇಗೌಡ ಕಾನೂನು ಮಹಾವಿದ್ಯಾಲಯ, ಜಿಲ್ಲಾ ವಕೀಲರ ಸಂಘ, ಮುದ್ದೇನಹಳ್ಳಿ ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದ ಜ್ಞಾನ ವೃದ್ಧಿಸುತ್ತದೆ. ಜ್ಞಾನದಿಂದ ಕಾನೂನಿನ ತಿಳಿವಳಿಕೆ ಹೆಚ್ಚುತ್ತದೆ. ತಮಗೆ ಬೇಕಾದ ಹಕ್ಕು ಮತ್ತು ನ್ಯಾಯ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದಿಂದ ಯಾರು ಬೇಕಾದರೂ ಉಚಿತ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು. ಕಾನೂನು ಸೇವಾ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗುತ್ತಿದೆ. ದುರ್ಬಲರಿಗೆ ಉಚಿತ ಕಾನೂನು ನೆರವು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಜುಲೈ 8 ರಂದು ಲೋಕ್ ಅದಾಲತ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಬಳ್ಳಾಪುರ ವತಿಯಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು.
ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರ್ ವಾಹನ, ಅಪಘಾತ ಪರಿಹಾರ, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಪ್ರಕರಣಗಳು, ಬ್ಯಾಂಕ್ ಸಂಬಂಧಿಸಿದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ಸಿವಿಲ್ ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, ಪ್ರತಿಯೊಬ್ಬರಿಗೂ ದೈನಂದಿನ ಜೀವನಕ್ಕೆ ಅನ್ವಯವಾಗುವ ಸಾಮಾನ್ಯ ಕಾನೂನು ಕುರಿತು ಮಾಹಿತಿ, ಅರಿವು ಇರಲೇಬೇಕು. ಕಾನೂನು ತಿಳಿದವರು ತಿಳಿಯದವರಿಗೆ ತಿಳಿಸಿ ಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು. ಕೆಂಪೇಗೌಡ ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಕಾನೂನು ಅರಿವು ನೆರವು ಕಾರ್ಯಕ್ರಮದ ಕುರಿತು ಕಿರು ನಾಟಕ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಕೆಂಪೇಗೌಡ ಕಾನೂನು ಮಹಾವಿದ್ಯಾಲಯ ಅಧ್ಯಕ್ಷ ಪಿ.ಎ.ಮೋಹನ್, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಚನ್ನಪ್ಪರೆಡ್ಡಿ, ಕೆಂಪೇಗೌಡ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲೆ ಪೆÇ್ರ.ಬಿ.ಜಿ.ಶೋಭಾ, ಜಿಲ್ಲಾ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುರಳಿ ಮೋಹನ್, ಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷ ಮುನಿನಾರಾಯಣಪ್ಪ, ಉಪಾಧ್ಯಕ್ಷೆ ಛಾಯಾ, ಟಿ.ಡಿ.ಒ ಶ್ರೀನಿವಾಸ್, ಸಂಪನ್ಮೂಲ ವ್ಯಕ್ತಿಗಳಾಗಿ ಎಂ.ಎಸ್.ಜಯ ಸುಧಾ, ಕೆಂಪೇಗೌಡ ಕಾನೂನು ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು, ಮುದ್ದೇನಹಳ್ಳಿ ಗ್ರಾಮಸ್ಥರು ಹಾಜರಿದ್ದರು.
