ಶ್ರೀ ರಾಮನವಮಿ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ :
ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು :
ಬ್ಯಾಟರಾಯನಪುರ : ಕ್ಷೇತ್ರದ ಹುಣಸಮಾರನಹಳ್ಳಿ ಪುರಸಭೆ ವ್ಯಾಪ್ತಿಯ ಭಾರತಿನಗರದ ಶ್ರೀರಾಮ ದೇವಾಲಯದಲ್ಲಿ ಶ್ರೀ ರಾಮನವಮಿಯ ಶುಭ ವೇಳೆಯಲ್ಲಿ 9 ನವ ಜೋಡಿಗಳು ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಈ ಕುರಿತು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಿರಿಯ ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್ ಮಾತನಾಡಿ ‘ಕಳೆದ ಹಲವು ವರ್ಷಗಳಿಂದ ಶ್ರೀ ರಾಮನವಮಿ ಹಬ್ಬದಂದು ಭಾರತಿನಗರದ ನಗರದ ಶ್ರೀ ರಾಮ ದೇವಾಲಯದಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬರಲಾಗುತ್ತಿದ್ದು, ವಿವಾಹಕ್ಕೆ ಅಗತ್ಯವಿರುವ ಸಲಕರಣೆಗಳನ್ನು ನೀಡುವ ಮೂಲಕ ಬಡವರ ಕಲ್ಯಾಣಕ್ಕಾಗಿ ಅಳಿಲು ಸೇವೆ ಮಾಡಲಾಗುತ್ತಿದೆ. ಈ ಬಾರಿ 9 ಜೋಡಿಗಳು ಹಸೆಮಣೆ ತುಳಿದು ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಶ್ರೀ ರಾಮನವಮಿ ಪ್ರಯುಕ್ತ ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿಗೆ ಭೋಜನ ವ್ಯವಸ್ಥೆ, ವಿವಿಧ ಜಾನಪದ ಕಲಾತಂಡಗಳ ಕಲಾ ಪ್ರದರ್ಶನದೊಂದಿಗೆ ಗ್ರಾಮದ ರಾಜಬೀದಿಗಳಲ್ಲಿ ಶ್ರೀ ರಾಮದೇವರ ಮೆರವಣಿಗೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಣಸಮಾರನಹಳ್ಳಿ, ಭಾರತಿನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *