




ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ನಗರ ವ್ಯಾಪ್ತಿಯ ಕೊಡಿಗೇಹಳ್ಳಿಯ ಮುನೇಶ್ವರ ಬಡಾವಣೆಯಲ್ಲಿ ಸುಮಾರು 2 ಕೋಟಿ ರು.ವೆಚ್ಚದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವರು, ಬ್ಯಾಟರಾಯನಪುರ ಕ್ಷೇತ್ರದ ಶಾಸಕರಾದ ಕೃಷ್ಣಬೈರೇಗೌಡ ಅವರು ಭಾನುವಾರ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ‘2 ಕೋಟಿ ರು.ವೆಚ್ಚದಲ್ಲಿ ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಲೊಟ್ಟೆಗೊಲ್ಲಹಳ್ಳಿ, ಮುನೇಶ್ವರ ಬಡಾವಣೆ ಸೇರಿದಂತೆ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದ್ದು, ಇದರ ಭಾಗವಾಗಿ ಇಂದು ಮುನೇಶ್ವರ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಾರ್ಡ್ ವ್ಯಾಪ್ತಿಯ ಇನ್ನುಳಿದ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎನ್.ಎನ್. ಶ್ರೀನಿವಾಸಯ್ಯ, ಹನುಮಂತಿ, ಕೊಡಿಗೇಹಳ್ಳಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ವೆಂಕಟಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್, ಮುಖಂಡರಾದ ಮಹೇಶ್, ಅಣ್ಣಪ್ಪ, ರಾಜು, ಅಮರನಾಥ್ ಸೇರಿದಂತೆ ಮುನೇಶ್ವರ ಬಡಾವಣೆಯ ನಿವಾಸಿಗಳಿದ್ದರು.
