



ಶಿರಡಿ ಶ್ರೀ ಸಾಯಿಬಾಬಾ ಮಂದಿರ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 5ನೇ ವಾರ್ಷಿಕೋತ್ಸವ :
ಯಲಹಂಕ : ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಸಮೀಪ ಇರುವ ಶಿರಡಿ ಶ್ರೀ ಸಾಯಿಬಾಬಾ ಮಂದಿರ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಬುಧವಾರ ಆಯೋಜಿಸಿದ್ಧ ದೇವಾಲಯದ 5ನೇ ವಾರ್ಷಿಕೋತ್ಸವ ಹಾಗೂ ಗುರುಪೂರ್ಣಿಮೆ ಕಾರ್ಯಕ್ರಮ ಅಪಾರ ಸಂಖ್ಯೆಯ ಭಕ್ತರ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿಂದ ನೆರವೇರಿತು.
ಗುರುಪೂರ್ಣಿಮೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಮತ್ತು ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ, ಅಭಿಷೇಕ, ಶೇಷ ಆರತಿ, ಕಳಶ ಸ್ಥಾಪನೆ, ಗಣಪತಿ ಹೋಮ, ರಾಮ ತಾರಕ ಹೋಮ, ಶ್ರೀ ದತ್ತಾತ್ರೇಯ ಸಹಸ್ರನಾಮ ಹೋಮ, ಪೂರ್ಣಹುತಿ, ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಮುಂತಾದ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಮಹತ್ವದ ಈ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಪಾಲ್ಗೊಂಡು ಶ್ರೀ ಶಿರಡಿ ಸಾಯಿ ಬಾಬಾ, ಶ್ರೀ ವೀರಾಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಭಕ್ತಿಯಿಂದ ನಮಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ಎನ್ ರಮೇಶ್, ಯಲಹಂಕ ಗ್ರಾ.ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ದ.ಸಂ.ಸ. ಕೆಂಪು ಸೇನೆಯ ರಾಜ್ಯಾಧ್ಯಕ್ಷ ರಾಜಣ್ಣ, ಸಿಂಗನಾಯಕನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಸ್.ಜಿ. ಪ್ರಶಾಂತ್ ರೆಡ್ಡಿ, ಬಿಜೆಪಿ ಮುಖಂಡರಾದ ಸತೀಶ್ ರೆಡ್ಡಿ, ಮುನಿರಾಮರೆಡ್ಡಿ, ಯುವ ಮೋರ್ಚಾ ಮುಖಂಡರಾದ ಎಚ್.ಎಸ್.ಕಿರಣ್, ಶರತ್ ಸೇರಿದಂತೆ ಇನ್ನಿತರ ಗಣ್ಯರಿದ್ದರು.
ಗುರುಪೂರ್ಣಿಮೆ ಅಂಗವಾಗಿ ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ಭಕ್ತಿಯಿಂದ ನಮಿಸಿ ಪ್ರಸಾದ ಸ್ವೀಕರಿಸಿದರು.
