ಹುಬ್ಬಳ್ಳಿ :- ಗ್ರಾಮೀಣ ಭಾಗದಲ್ಲಿ ಹಲವಾರು ಯೋಜನೆಗಳು ಚಾಲ್ತಿಯಲ್ಲಿವೆ. ಯಾವುದೇ ಯೋಜನೆಗಳ ಕಾಮಗಾರಿಗಳು ವಿಳಂಬವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.

ಹುಬ್ಬಳ್ಳಿ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆಗಳು, ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣವಾಗುತ್ತಿವೆ. ಹೀಗಾಗಿ ತಮ್ಮ ವ್ಯಾಪ್ತಿಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ಅಲ್ಲದೇ ಬಾಕಿ ಉಳಿದ ಯೋಜನೆಗಳ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು.

ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆ ತುಸು ವಿಳಂಬವಾಗಿದೆ. ಜುಲೈ ತಿಂಗಳಲ್ಲಿ ಶೇ. 80 ರಷ್ಟು ಬಿತ್ತನೆಯಾಗಿರುತ್ತದೆ. ಹೆಸರು, ಶೇಂಗಾ, ಸೊಯಾಬಿನ್ ಸೇರಿದಂತೆ ವಿವಿಧ ಬೆಳಗಳನ್ನು ಬಿತ್ತನೆ ಮಾಡಲಾಗಿದೆ. ಬಿತ್ತನೆ ಬೀಜಗಳನ್ನು ಶೇಖರಣೆ ಮಾಡಿ ಇಡಲಾಗಿದೆ. ಬರಗಾಲ ಪ್ರದೇಶಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಸಭೆಗೆ ತಿಳಿಸಿದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 21 ವಸತಿ ನಿಲಯಗಳಿದ್ದು, ಅದರಲ್ಲಿ 12 ಮೆಟ್ರಿಕ್ ನಂತರದ ವಸತಿ ನಿಲಯಗಳು ಹಾಗೂ 9 ಮೆಟ್ರಿಕ್ ಪೂರ್ವ ವಸತಿ ನಿಲಯಗಳಿವೆ. ವಸತಿ ನಿಲಯಗಳಲ್ಲಿ ಗ್ರಂಥಾಲಯ, ರುಚಿಯಾದ ಊಟ ಮತ್ತು ಮಕ್ಕಳಿಗೆ ಅವಶ್ಯಕ ಕಿಟ್‌ಗಳನ್ನು ನೀಡಲಾಗುತ್ತಿದೆ. ಮಕ್ಕಳ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ ಕಟ್ಟಡ, ಅಂಗನವಾಡಿ ಕಟ್ಟಡ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ, ಗ್ರಾಮೀಣ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳಿಗೆ ದೀಪಕ ಮಡಿವಾಳರ ಅವರು ಸೂಚಿಸಿದರು.

ಸಾರ್ವಜನಿಕರಿಗೆ ವಿವಿಧ ಸಸಿಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. 2 ಲಕ್ಷಕ್ಕೂ ಅಧಿಕ ಸಸಿಗಳನ್ನು ವಿತರಣೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಕರಿಬೇವು, ಬೇವು, ಸಾಗವಾನಿ, ಲಿಂಬೆ, ಸೀತಾಫಲ, ಮಹಾಗನಿ ಸಸಿಗಳನ್ನು ರಸ್ತೆಯ ಪಕ್ಕದಲ್ಲಿ ನೆಡಲಾಗುತ್ತಿದ್ದು, ಅವುಗಳ ನಿರ್ವಹಣೆಗೆ ಒಬ್ಬರನ್ನು ನೇಮಿಸಲಾಗುವುದು. ಬುಡ್ನಾಳ, ಚನ್ನಾಪೂರ, ರಾಯನಾಳ, ಕುಸುಗಲ್ ರಸ್ತೆ, ಅಣ್ಣಿಗೇರಿ ನಗರಗಳಲ್ಲಿ ನೆಡುತೋಪು ನಿರ್ಮಾಣ ಮಾಡಲಾಗಿರುತ್ತದೆ ಎಂದು ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯ ಅಧಿಕಾರಿ ಅರವಿಂದ ಕಣವಿ ಹಾಗೂ ಪ್ರಾದೇಶಿಕ ವಲಯದ ವಲಯ ಅರಣ್ಯ ಅಧಿಕಾರಿ ಎನ್.ಎಸ್.ಉಪ್ಪಾರ ಸಭೆಗೆ ತಿಳಿಸಿದರು.

ರಾಷ್ಟಿಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ, ನಿರ್ವಹಣೆ ಪ್ಯಾಕ್ ಹೌಸ್, ಸಮುದಾಯ ಕೃಷಿ ಹೊಂಡ, ವೈಯಕ್ತಿಕ ಕೃಷಿ ಹೊಂಡ, ಈರುಳ್ಳಿ ಶೇಖರಣಾ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದು. ಅನುದಾನ ಬಿಡುಗಡೆಯಾದ ನಂತರ ಕಾಮಗಾರಿಗಳನ್ನು ಆರಂಭಿಸಲಾಗುತ್ತದೆ. ತರಕಾರಿ, ಹೂವು ಬೆಳೆಗಳಿಗೆ ಸಬ್ಸಿಡಿ ನೀಡಲಾಗುವುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಭುಲಿಂಗ ಗಡ್ಡದ ಮಾಹಿತಿ ಒದಗಿಸಿದರು.

ಈಗಾಗಲೇ 146 ಅಂಗನವಾಡಿ ಕೇಂದ್ರಗಳಿದ್ದು, ಮಾರ್ಚ ತಿಂಗಳಲ್ಲಿ 9 ಹೊಸ ಅಂಗನವಾಡಿ ಕೇಂದ್ರ ಆರಂಭವಾಗಿದೆ. ಏಪ್ರೀಲ್ ತಿಂಗಳಲ್ಲಿ 12 ವಿಪರೀತ ಕಡಿಮೆ ತೂಕದ ಮಕ್ಕಳಿದ್ದರು. ಆಗಸ್ಟ್ ಕೊನೆಯಲ್ಲಿ 3 ಮಕ್ಕಳು ಮಾತ್ರ ಇರುವರು. ಏಪ್ರೀಲ್ ತಿಂಗಳಲ್ಲಿ 173 ಸಾಧಾರಣಾ ಕಡಿಮೆ ತೂಕದ ಮಕ್ಕಳಿದ್ದು, ಅದರಲ್ಲಿ 105 ಮಕ್ಕಳು ಆಗಸ್ಟ್ ಅಂತ್ಯಕ್ಕೆ ಇರುವರು. ಅಮೃತ ಯೋಜನೆಯಡಿ ಸ್ತ್ರೀ ಶಕ್ತಿ ಸಂಘಗಳಿಗೆ ಧನ ಸಹಾಯ ನೀಡಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಜಾವೂರ ತಿಳಿಸಿದರು.

ಹೆಸ್ಕಾಂ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ವರದಿ ಒಪ್ಪಿಸಿದರು.

ಪಂಚಾಯತ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಕುರ್ತಕೋಟಿ,
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರಾದ ಜಗದೀಶ ಪಾಟೀಲ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತಗಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *