ಬಳ್ಳಾರಿ,ಸೆ.16
ಡೆಂಗ್ಯೂ ನಿಯಂತ್ರಿಸಲು ಸಮುದಾಯ ಮಟ್ಟದಲ್ಲಿ ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯ ಇಲಾಖೆಯ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ “ಎಲ್ಲರ ಸಹಭಾಗಿತ್ವದೊಂದಿಗೆ ಡೆಂಗ್ಯೂಯನ್ನು ಶೋಧಿಸೋಣ” ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಜಾಗೃತಿ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಡೆಂಗೀ ಜಾಗೃತಿ ರಥಕ್ಕೆ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಮುದಾಯ ಮಟ್ಟದಲ್ಲಿ ಡೆಂಗ್ಯೂ ನಿಯಂತ್ರಿಸಲು ಮನೆಯಲ್ಲಿ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ತುಂಬಿಸಬೇಕು(ಡ್ರೈ ಡೇ). ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು.
ಮಳೆ ಬಂದ ಸಂದರ್ಭದಲ್ಲಿ ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆನೀರಿನಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿ, ಸಂಸ್ಥೆಗಳ ಒಳಾಂಗಣ ಹಾಗೂ ಹೊರಾಂಗಣಗಳಲ್ಲಿ ಈಡೀಸ್ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈಡೀಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ, ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವರು. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು ಎಂದು ತಿಳಿಸಿದರು.
ಯಾವುದೇ ಜ್ವರವಿದ್ದರೂ ನಿರ್ಲಕ್ಷ್ಯ ಮಾಡದೇ, ತಕ್ಷಣ ವೈದ್ಯರಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗೀ ಜ್ವರದಿಂದ ಉಂಟಾಗುವ ಸಾವು ನೋವುಗಳನ್ನು ತಡೆಗಟ್ಟಬಹುದು. ಡೆಂಗೀ ನಿಯಂತ್ರಣದಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಸಹಕಾರವನ್ನು ಪಡೆಯುವುದು ಅತ್ಯಗತ್ಯವಾಗಿದೆ ಎಂದರು.
ಡೆಂಗೇ ಕುರಿತು ಜಾಗೃತಿ ಮೂಡಿಸುವ ರಥವು ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 440 ಗ್ರಾಮಗಳಲ್ಲಿ ಡೆಂಗಿ ರಥವು ಮುಂದಿನ 2 ತಿಂಗಳ ಕಾಲ ಸಂಚರಿಸಿ ಜಾಗೃತಿ ಮೂಡಸಲಿದೆ ಎಂದರು.
ಡೆಂಗಿ ಜಾಗೃತಿ ರಥವು ಭಿತ್ತಿಫಲಕಗಳನ್ನು ಹೊಂದಿದ್ದು, ಧ್ವನಿಸುರುಳಿಯ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಂದೇಶ, ಜಾಗೃತಿ ಗೀತೆಗಳು ಹಾಗೂ ಆಡಿಯೋ ಕ್ಲಿಪಿಂಗ್‍ಗಳ ಮೂಲಕ ಜಾಗೃತಿ ನೀಡಲಿದೆ. ಮತ್ತು ಆಯಾ ಕ್ಷೇತ್ರ ಮಟ್ಟದ ಸಿಬ್ಬಂದಿಯವರು ರಥವು ಗ್ರಾಮಕ್ಕೆ ಆಗಮಿಸಿದಾಗ ಜನತೆಯನ್ನು ಸೇರಿಸಿ ಡೆಂಗಿ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡೆಂಗೀ ಜ್ವರದ ಲಕ್ಷಣಗಳು ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಆಚಿತರಿಕ ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ, ಡೆಂಗೀ ಜ್ವರವನ್ನು ತಡೆಗಟ್ಟಲು ಲಸಿಕೆ ಲಭ್ಯವಿರುವುದಿಲ್ಲ. ಆದ್ದರಿಂದ ರೋಗ ಲಕ್ಷಣಗಳಿಗೆ ಅನುಗುಣವಾದ ಚಿಕಿತ್ಸೆಯಿಂದ ಗುಣಪಡಿಸಬಹುದು. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದಲ್ಲಿ, ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಹಾಗೂ ಚಿಕಿತ್ಸೆ ಲಭ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಮನಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಆರ್.ಅನಿಲ್ ಕುಮಾರ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಾ ಕಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಜಿಲ್ಲಾ ವಿಬಿಡಿ ಕನ್ಸಲ್‍ಟೆಂಟ್ ಹೆಚ್.ಪ್ರತಾಪ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಪ್ಪ, ಶಕುಂತಲಾ ಮ್ಯಾಳಿ, ವಿರೂಪಾಕ್ಷ, ನಾಗರಾಜ, ರವೀಂದ್ರ ಜಿನಗಾ, ಪ್ರಯೋಗಶಾಲಾ ತಂತ್ರಜ್ಞರಾದ ಶಕುಂತಲಾ, ನಂದಿನಿ, ಅಂಬುಜ ಮತ್ತು ಜಿಲ್ಲಾ ವಿಬಿಡಿಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *