ಬೀದರ. ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ. 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ರವಿವಾರ ಮತದಾನ ಜಾಗೃತಿಗಾಗಿ ಬೀದರ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಫ್ ಸಮಿತಿ ಬೀದರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಇಂದು ಹಮ್ಮಿಕೊಂಡಿದ್ದು, ಇದು ಬೀದರ ನಗರದಲ್ಲಿ ಮಾತ್ರವಲ್ಲದೆ ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಚರಿಸಲು ಎಲ್ಲಾ ಮತಗಟ್ಟೆಗಳಲ್ಲಿ ಏಪ್ರಿಲ್. 28 ರಿಂದ ಮೇ. 7 ರವರೆಗೆ ಮತದಾನದ ದಿನದವರೆಗೆ ಬಿಎಲ್‌ಓಗಳು ಮತಗಟ್ಟೆಗಳ ಮೇಲೆ ಧ್ವಜಾರೋಹಣ ಮಾಡುವರು. ಧ್ವಜದ ವಿನ್ಯಾಸ ಮತದಾನ ದಿನ ಮೇ. 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಗಳವರೆಗೆ ಎಂದು ಬಟ್ಟೆಗಳ ಮೇಲೆ ಮುದ್ರಿಸಿದ ಧ್ವಜದ ವಿನ್ಯಾಸ ಇರಲಿದೆ ಎಂದು ಹೇಳಿದರು.
ನಾವು ಮತದಾನ ಮಾಡಿದರೆ ಸಾಲದು. ನಮ್ಮ ಮನೆಯವರು, ಅಕ್ಕಪಕ್ಕದವರು ಹಾಗೂ ನಮ್ಮ ಓಣಿಯ ಎಲ್ಲರಿಗೂ ಮತದಾನ ಮಾಡುವಂತೆ ತಿಳಿಸಬೇಕು. ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ಹೆಚ್ಚು- ಹೆಚ್ಚು ಮತದಾನ ಮಾಡಬೇಕು. ಮತಗಟ್ಟೆಗಳ ಮೇಲೆ ಧ್ವಜಾರೋಹಣ ಮಾಡುವ ಉದ್ದೇಶ ಮತದಾರರಿಗೆ ತಮ್ಮ ಮತಗಟ್ಟೆ ಎಲ್ಲಿದೆ ಎಂಬುದು ಅವರಿಗೆ ತಿಳಿಯುವುದಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಫ್ ಸಮಿತಿ ಅಧ್ಯಕ್ಷರಾದ ಡಾ. ಗಿರೀಶ್ ಬದೋಲೆ ಅವರು ಮಾತನಾಡಿ, ಬೀದರ ಲೋಕಸಭಾ ಕ್ಷೇತ್ರದ ಜನರು ಈ ಸಲ ಹೆಚ್ಚಿನ ಮತದಾನ ಮಾಡಬೇಕು. ಕಳೆದ ಚುನಾವಣೆಯಲ್ಲಿ ಶೇ. 64 ಪ್ರತಿಶತ ಮತದಾನವಾಗಿತ್ತು ಈ ಸಲ ಶೇ. 80 ಪ್ರತಿಶತಕ್ಕಿಂತ ಹೆಚ್ಚಿನ ಮತದಾನ ಆಗಬೇಕೆಂಬ ಉದ್ದೇಶದಿಂದ ಜಿಲ್ಲಾ ಸ್ವೀಫ್ ವತಿಯಿಂದ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಫ್ ಸಮಿತಿ ಬೀದರ ವತಿಯಿಂದ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಜಿಲ್ಲಾ ಸ್ವೀಫ್ ಸಮಿತಿ ವತಿಯಿಂದ ಸೈಕ್ಲೋಥಾನ್ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಕ್ಕೆ ಅಭಿನಂದನೆಗಳು. ಶೇ. 100 ಪ್ರತಿಶತ ಮತದಾನವಾದರೆ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಹಾಗಾಗಿ ಮೇ. 7 ರಂದು ಎಲ್ಲರೂ ಮತದಾನ ಮಾಡಬೇಕೆಂದು ಹೇಳಿದರು.
ಸೈಕಲ್ ಜಾಥಾ ಕಾರ್ಯಕ್ರಮ ಬೀದರ ಕೋಟೆ ಆವರಣದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ನಡೆಯಿತು. ಇದಕ್ಕೆ ಬೀದರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿರುವ ಮತಗಟ್ಟೆ, ತೋಟಗಾರಿಕೆ ಇಲಾಖೆಯ ಮತಗಟ್ಟೆ ಹಾಗೂ ಪ್ರಶಾಂತ ಮಾಶೆಟ್ಟಿ ಪದವಿ ಕಾಲೇಜಿನ ಮತಗಟ್ಟೆಗಳಲ್ಲಿ ಧ್ವಜಾರೋಹಣ ಮಾಡಲಾಯಿತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲರಿಗೂ ಮತದಾನ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಗೌತಮ ಅರಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಾದ ಸಲೀಂ ಪಾಶಾ, ರೋಟರಿ ಕ್ಲಬ್ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ

R Hanumanthu

9845085793.    7349337989

Leave a Reply

Your email address will not be published. Required fields are marked *