

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನಾ ಸಮಾರಂಭ :
ಬ್ಯಾಟರಾಯನಪುರ : 2.65 ಲಕ್ಷ ಮತಗಳ ಭಾರೀ ಅಂತರದಲ್ಲಿ, ನಿರೀಕ್ಷೆಗೂ ಮೀರಿದ ಹೆಚ್ಚಿನ ಬಹುಮತ ನೀಡಿ ನನ್ನನ್ನು ಗೆಲ್ಲಿಸಿರುವ ಕಾರ್ಯಕರ್ತರಿಗೆ ಸದಾ ಚಿರ ಋಣಿ ಯಾಗಿರುತ್ತೇನೆ, ಸದಾ ಅವರೊಟ್ಟಿಗೆ ಇರುತ್ತೇನೆ ಎಂದು ಕೇಂದ್ರ ಅತಿಸಣ್ಣ ಸಣ್ಣ ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಬ್ಯಾಟರಾಯನಪುರ ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರದ ಬೆಳ್ಳಳ್ಳಿ ಕ್ರಾಸ್ ನ ಖಾಸಗಿ ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕರ್ತ ರಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ, ಅದರಲ್ಲೂ ಕಂದಾಯ ಇಲಾಖೆಯಂಥ ಪ್ರಮುಖ ಖಾತೆಯ ಸಚಿವರಿರುವ ಕ್ಷೇತ್ರದಲ್ಲಿ ಮೂವತ್ತೈದು ಸಾವಿರಕ್ಕೂ ಹೆಚ್ಚಿನ ಬಹಮತ ನೀಡಿರುವುದು ನಿಜಕ್ಕೂ ಅದ್ಭುತ ಸಾಧನೆ, ಈ ಸಾಧನೆಗಾಗಿ ಶ್ರಮಿಸಿರುವ ಕ್ಷೇತ್ರದ ಬಿಜೆಪಿ ಮುಖಂಡರು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್ ಸಿ ತಮ್ಮೇಶ್ಟ ಗೌಡರಿಗೆ ಹಾಗೂ ನನ್ನ ನೆಚ್ಚಿನ ಮುಖಂಡರು, ಕಾರ್ಯಕರ್ತರು, ಮತಬಾಂಧವರಿಗೆ ಅಭಾರಿಯಾಗಿ ರುತ್ತೇನೆ ಎಂದರು.
ಅತಿಶೀಘ್ರದಲ್ಲೇ ರಾಜ್ಯದಲ್ಲಿ ಉಪಚುನಾವಣೆ, ಬಿಬಿಎಂಪಿ ಚುನಾವಣೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಅದರಲ್ಲೂ ಸಹ ನಮ್ಮ ಮೈತ್ರಿ ಪಕ್ಷಗಳು ಇದಕ್ಕಿಂತ ಹೆಚ್ಚಿನ ಗೆಲುವು ಸಾಧಿಸಲು ಸಜ್ಜಾಗಬೇಕಿದೆ. ಈ ಎಲ್ಲಾ ಚುನಾವಣೆಗಳು ಕಾರ್ಯಕರ್ತರ ಚುನಾವಣೆ ಗಳಾಗಿದ್ದು, ಕಾರ್ಯಕರ್ತರೊಟ್ಟಿಗೆ ಮತಯಾಚನೆಗೆ ಬಂದು ಅವರ ಗೆಲುವಿಗೆ ಶ್ರಮಿಸುತ್ತೇನೆ. ಕೇಂದ್ರದಿಂದ ದೊರೆಯುವ ಅನುದಾನವನ್ನು ತಂದು ಬ್ಯಾಟರಾಯನಪುರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗಿಂತ ಹಗರಣಗಳ ಸಂಖ್ಯೆಯೇ ಹೆಚ್ಚಾಗಿದ್ದು, ಹಗರಣ ಗಳನ್ನು ಮರೆಮಾಚಲು ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯ ಮಂತ್ರಿಗಳು ಯಾವ್ಯಾವುದೋ ವಿಷಯಗಳನ್ನು ಅಡ್ಡ ತಂದು, ತರಹೇವಾರಿ ಹೇಳಿಕೆಗಳನ್ನು ನೀಡುತ್ತಾ, ವಿಷಯಾಂತರ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಮುಂಬರುವ ಎಲ್ಲಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ಅತ್ಯದ್ಭುತ ಗೆಲುವು ಸಾಧಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್ ಸಿ ತಮ್ಮೇಶ್ ಗೌಡ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತುಗೌಡ, ಹಿರಿಯ ಬಿಜೆಪಿ ಮುಖಂಡರಾದ ತಿಂಡ್ಲು ರಾಜಗೋಪಾಲ್, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಕೆ.ಎ.ಮುನೀಂದ್ರಕುಮಾರ್, ಬ್ಯಾಟರಾಯನಪುರ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ವೇಣು ಗೋಪಾಲ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಲೋಹಿತ್ ಗೌಡ, ತಿಮ್ಮೇಗೌಡ, ಜಕ್ಕೂರು ವಾರ್ಡ್ ಬಿಜೆಪಿ ಅಧ್ಯಕ್ಷ ಕೆ.ಎ.ಅನಿಲ್, ಬಿಜೆಪಿ ಮುಖಂಡರಾದ ಮುನಿರಾಜು, ದೊಡ್ಡಜಾಲ ಶ್ರೀನಿವಾಸಯ್ಯ, ಮುನಿಹನುಮಯ್ಯ, ಮುನಿಸ್ವಾಮಿ ಒಡೆಯರ್(ಆನಂದ್ ಮಾಸ್ಟರ್), ಕಿರಣ್, ಶ್ರೀಕಂಠಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ಸೇರಿದಂತೆ ವಿವಿಧ ವಾರ್ಡ್ ಗಳು ಮತ್ತು ಮೋರ್ಚಾಗಳ ಅಧ್ಯಕ್ಷರಿದ್ದರು.